ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರನನ್ನು ಸಾಯಿಸುತ್ತೇವೆ ಎಂದು ಬೆದರಿಕೆ
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಜೀವ ಬೆದರಿಕೆ ಒಡ್ಡಿ ಬಂದಿರುವ ಪತ್ರ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಇನ್ನೊಂದು ಸಮರಕ್ಕೆ ಕಾರಣವಾಗಿದೆ. ಬೆದರಿಕೆ ಒಡ್ಡುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಸಿ.ಟಿ ರವಿ ಅವರನ್ನು ಗುರಿಯನ್ನಾಗಿಸಿಕೊಂಡಿರುವ ದುಷ್ಕರ್ಮಿಗಳು ಅವರ ವಿರುದ್ಧ ವ್ಯೂಹ ರಚಿಸಿರುವ ಸಾಧ್ಯತೆಯನ್ನು ಅವರಿಗೆ ಬಂದಿರುವ ಬೆದರಿಕೆಯ ಸಂದೇಶಗಳ ಹಿನ್ನೆಲೆಯಲ್ಲಿ ತಳ್ಳಿಹಾಕಲಾಗದು. ಕಾಂಗ್ರೆಸ್ ಸರ್ಕಾರದಿಂದ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು ಮಾರ್ಜಾಲ ನ್ಯಾಯದಂತಾಗುತ್ತದೆ ಎಂದು ಹೇಳಿದ್ದಾರೆ.
ಸಿ.ಟಿ ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯ. ಈ ನಿಟ್ಟಿನಲ್ಲಿ ಸಿ.ಟಿ ರವಿ ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಲು ಒತ್ತಾಯಿಸುವೆ. ಸಿ.ಟಿ ರವಿ ಅವರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆ, ದೌರ್ಜನ್ಯಗಳು ಮುಂದುವರಿದಲ್ಲಿ ಬಿಜೆಪಿ ಅದನ್ನು ಸವಾಲಾಗಿ ಸ್ವೀಕರಿಸಿ ಹೋರಾಡಲಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿರುವ ಸಿ.ಟಿ ರವಿ ಮನೆಗೆ ಶನಿವಾರ ಜೀವ ಬೆದರಿಕೆ ಹಾಕಿದ ಅನಾಧೇಯ ಪತ್ರವೊಂದು ಬಂದಿದೆ. ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಈ ಪತ್ರ ಬಂದಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಅವರು ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.