ಬೆಂಗಳೂರು: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಬೆಂಗಳೂರು ನಡುವೆ ಏ.12ರಿಂದ ಹೊಸ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸೇತುವೆಗೆ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಏ.12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬಲಿದೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ. ಏ.11ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಟಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದ್ದಾರೆ. ಹೊಸ ರೈಲಿನ ಸಮಯ ಇತ್ಯಾದಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.