ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು

ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ಗೆ ಹೋಗುವ ಎಚ್ಚರಿಕೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತರಾದ ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿಜವಾದ ಸಂಕಷ್ಟ ಈಗ ಶುರುವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ವಿರುದ್ಧವೂ ಪೊಲೀಸ್‌ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ ವಿರುದ್ಧ ಕಬ್ಬನ್​ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯ ಸರ್ಕಾರ ಅಮಾಯಕರ ಸಾವಿಗೆ ಕಾರಣವಾಗಿದ್ದು, ಸಾರ್ವಜನಿಕ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ಸಿಎಂ, ಡಿಸಿಎಂ ಮತ್ತು ಗೃಹ ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ.

















































 
 

ಬಿಜೆಪಿ ನಾಯಕರಾದ ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಎಸ್.ದತ್ತಾತ್ರಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಅವರ ನಿಯೋಗ ತೆರಳಿ ದೂರು ನೀಡಿದೆ.

11 ಜನರ ಸಾವಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ನೇರ ಕಾರಣ. ಅವರೇ ಒತ್ತಡ ಹಾಕಿ ಕಾರ್ಯಕ್ರಮ ನಡೆಸಿದ್ದಾರೆ. ಅವರಿಗೆ ನಿಜವಾಗಿಯೂ ಸಂವಿಧಾನದ ಮೇಲೆ ಗೌರವ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಸಿಎಂ, ಡಿಸಿಎಂ ಇಬ್ಬರ ವಿರುದ್ಧವೂ ಎಫ್​ಐಆರ್ ದಾಖಲಿಸಬೇಕು ಹಾಗೂ ಗೃಹ ಸಚಿವ ಪರಮೇಶ್ವರ್​ ಕೂಡ ಇದರಲ್ಲಿ ಪ್ರಮುಖ ಹೊಣೆಗಾರರು ದೂರಿನಲ್ಲಿ ಆರೋಪ ಮಾಡಲಾಗಿದೆ.

ಗುಪ್ತಚರ ಇಲಾಖೆಯ ವರದಿ ಇದ್ದರೂ ನಿರ್ಲಕ್ಷ್ಯ ಮಾಡಲಾಗಿದೆ. ರಾಜಕೀಯವಾಗಿ ಹೆಸರು ಪಡೆಯಲು ಸರ್ಕಾರವೇ ಈ ಕೊಲೆಗಳಿಗೆ ಕಾರಣವಾಗಿದೆ. ಸಿಎಂ, ಡಿಸಿಎಂ ಅವರಿಗೆ ರಾಜಕೀಯ ಲಾಭದ ಸ್ಪಷ್ಟತೆ ಇತ್ತು. ಗೃಹ ಸಚಿವರು ಕೂಡ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರು. ಡಿ.ಕೆ.ಶಿವಕುಮಾರ್ ಅವರು ಸಂಪೂರ್ಣ ಹೊಣೆ ಹೊರಬೇಕು. ಜನರ ಸಾವಿಗೆ ನೈತಿಕ ಹೊಣೆ ಹೊರಬೇಕು. ರಾಜೀನಾಮೆ ಕೊಟ್ಟಾಗ ಮಾತ್ರವೇ ಡಿಸಿಎಂ ಕಣ್ಣೀರಿಗೆ ನಿಜವಾದ ಅರ್ಥ ಬರುತ್ತದೆ. ಒಂದು ವೇಳೆ ಇವರ ಮೇಲೆ ಎಫ್‌ಐಆರ್‌ ದಾಖಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ದುರಂತಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ ಎಂದು ಖಂಡಿಸಿ ಹಾಗೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಪ್ರತಿಭಟನೆಯೂ ನಡೆಯಿತು. ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶಿಸಲಾಗಿದೆ. ನ್ಯಾಯಾಂಗ ತನಿಖೆಗೆ ಅರ್ಹವಾಗಿರುವ ಈ ಕೇಸನ್ನು ಸರ್ಕಾರವೇ ದಿಕ್ಕು ತಪ್ಪಿಸುತ್ತಿದೆ. ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಪೊಲೀಸರನ್ನು ಸಸ್ಪೆಂಡ್‌ ಮಾಡಿ ಕ್ರಿಕೆಟ್‌ ಸಂಸ್ಥೆಯ ಮೇಲೆ ಎಫ್‌ಐಆರ್‌ ದಾಖಲಿಸಿದೆ ಎಂದು ಆರೋಪಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top