4-5 ವರ್ಷದ ಹೆಣ್ಣು ಹುಲಿಯ ಕಳೇಬರ ಪತ್ತೆ
ಬೆಂಗಳೂರು: ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಹುಲಿಗಳ ಹತ್ಯಾಕಾಂಡ ಹಸಿರಾಗಿರುವಾಗಲೇ ರಾಜ್ಯದಲ್ಲಿ ಇನ್ನೊಂದು ಹುಲಿ ಸಾವನ್ನಪ್ಪಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. 4-5 ವರ್ಷದ ಹೆಣ್ಣು ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದೆ. ಇಂದು ವೈದ್ಯರು ಹುಲಿ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.
ಐದು ಹುಲಿಗಳನ್ನು ವಿಷವಿಕ್ಕಿ ಸಾಯಿಸಿದ ಪ್ರಕರಣ ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಈ ಭೀಕರ ಹತ್ಯಾಕಾಂಡಕ್ಕೆ ಕಾರಣರದವರನ್ನು ಪತ್ತೆಹಚ್ಚಲು ತೀವ್ರಗತಿಯಲ್ಲಿ ತನಿಖೆ ನಡೆಯುತ್ತಿದೆ. ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಅನ್ನೋದು ಖಚಿತವಾಗಿದೆ. ಆದರೆ ಈ ವಿಷ ಯಾವುದು? ಎಷ್ಟು ಪ್ರಮಾಣದಲ್ಲಿ ಹಾಕಲಾಗಿತ್ತು ಎಂದು ತಿಳಿಯಲು ಲ್ಯಾಬ್ಗೆ ಸ್ಯಾಂಪಲ್ ಕಳುಹಿಸಲಾಗಿದೆ. ಹಸುವಿನ ಮೇಲೆ ದಾಳಿ ನಡೆಸಿದ ಸೇಡಿಗೆ ವಿಷವಿಟ್ಟಿರುವ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಶಂಕಿತ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಡಿಸಿಎಫ್ ಸ್ಪಷ್ಟನೆ ನೀಡಿದ್ದಾರೆ.
ಹುಲಿಗಳು ಮತ್ತು ಹಸು ಮೃತಪಟ್ಟ ಸ್ಥಳದಲ್ಲೇ ಅರಣ್ಯ ಸಿಬ್ಬಂದಿ ನಿನ್ನೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಹುಲಿಯ 5 ಮರಿಗಳು ಹಾಗೂ ಹಸುವಿನ ಅಂತ್ಯಕ್ರಿಯೆ ಪ್ರತ್ಯೇಕವಾಗಿ ಮಾಡಲಾಗಿದೆ. ಈ ವೇಳೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕೂಡ ಇದ್ದರು.
























