ಬೆಂಗಳೂರು: ದ್ವೇಷ ಭಾಷಣದ ಮೂಲಕ ಸಾಮಾಜಿಕ ಶಾಂತಿ, ಸಾಮರಸ್ಯ ಕದಡುವವರ ವಿರುದ್ಧ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸುವಂತೆ ಸಿಎಂ ಸಿದ್ದರಾಮಯ್ಯ ಆಜ್ಞಾಪಿಸಿದ್ದಾರೆ.
ರಾಜ್ಯದ ಪೊಲೀಸ್ ಇಲಾಖೆಯ ಕೇಂದ್ರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಸಾರ್ವಜನಿಕ ವಲಯದಲ್ಲಿ ಶಾಂತಿ ಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕೋಮು ಸಾಮರಸ್ಯ ಕದಡುವವರ ವಿರುದ್ಧ, ದ್ವೇಷ ಹರಡುವವರ ವಿರುದ್ದ ದೂರುಗಳು ಬಂದಲ್ಲಿ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಇಂತಹ ಘಟನೆಗಳು ಕಂಡುಬಂದಲ್ಲಿ ಸುಮೊಟೋ ಪ್ರಕರಣ ದಾಖಲು ಮಾಡುವಂತೆಯೂ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಅವರು ನುಡಿದಿದ್ದಾರೆ.
ಬಲಶಾಲಿ ಅಥವಾ ಬಡವನಾಗಲಿ ಪೊಲೀಸ್ ಠಾಣೆಯಲ್ಲಿ ಎಲ್ಲರಿಗೂ ಒಂದೇ ರೀತಿಯ ನ್ಯಾಯ ದೊರೆಯಬೇಕು. ಜೊತೆಗೆ ಪೊಲೀಸರ ತನಿಖೆಯ ಗುಣಮಟ್ಟ ಸಹ ಸುಧಾರಣೆಯಾಗಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಹಿರಿಯ ಅಧಿಕಾರಿಗಳು ನಿಯಮಿತವಾಗಿ ಪೊಲೀಸರು ಠಾಣೆಗಳಿಗೆ ತೆರಳಿ ಪರಿಶೀಲನೆ ಮಾಡುವಂತೆಯೂ ಸೂಚಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
























