ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆದರೂ ಅದರಲ್ಲಿ ಬಿಜೆಪಿಗೆ 130 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ವರೆಗೆ ತಾನು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ಕೇಂದ್ರ ಸರ್ಕಾರದ ಜೊತೆಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸುವುದಾಗಿ ಹೇಳಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಪಕ್ಷ ಸಂಘಟನೆಯ ದೃಷ್ಟಿಯಿಂದ ಕೆಲಸ ಮಾಡಿರುವುದಾಗಿಯೂ ಅವರು ನುಡಿದಿದ್ದಾರೆ.
ಬಿಜೆಪಿಯ ಕಾರ್ಯಕರ್ತರು ಮತ್ತು ಹೈಕಮಾಂಡ್ಗೆ ನನ್ನ ಕಾರ್ಯ ವೈಖರಿಯ ಬಗ್ಗೆ ತೃಪ್ತಿ ಇದೆ. ಆದ್ದರಿಂದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ನಾನೇ ಮುಂದುವರೆಯುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಅದಾಗ್ಯೂ ಹೈಕಮಾಂಡ್ ಯಾವುದೇ ರೀತಿಯ ನಿರ್ಣಯಗಳನ್ನು ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
























