ಮಂಗಳೂರು: ಕಳೆದ ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪಿಕಪ್ ಚಾಲಕ ಕೊಳತ್ತಮಜಲು ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತ ಆರೋಪಿ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ.
ಆರೋಪಿ ಶಾಹಿತ್ ಯಾನೆ ಸಾಹಿತ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಈತನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ. ಮೇ 27ರಂದು ಅಬ್ದುಲ್ ರಹಿಮಾನ್ ಅವರನ್ನು ಪರಿಚಿತರೇ ಮರಳು ಬೇಕೆಂದು ಹೇಳಿ ಕರೆಸಿಕೊಂಡು ಮಾರಕಾಯುಧಗಳಿಂದ ಕಡಿದು ಹತ್ಯೆಗೈದಿದ್ದರು. ಅವರೊಂದಿಗಿದ್ದ ಸ್ನೇಹಿತ ಕಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.

