ಬಸ್ಸಿನ ಎಮರ್ಜೆನ್ಸಿ ಬಾಗಿಲಿನಿಂದ ಹಾರಿ ತಪ್ಪಿಸಿಕೊಳ್ಳಲು ಯತ್ನ
ಪುತ್ತೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಸ್ಸಿನಲ್ಲಿ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ಜುಲೈ 22ರಂದು ನಡೆದಿದ್ದು, ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯುವತಿ ಜುಲೈ 22ರಂದು ಕಾಲೇಜು ಬಿಟ್ಟ ಬಳಿಕ ಸಂಜೆ ಮಂಗಳೂರಿನಿಂದ ಪುತ್ತೂರಿಗೆ ಬರುವ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ ಸುಮಾರು 6.30ಕ್ಕೆ ಬಸ್ ಬಂಟ್ವಾಳದ ಮಾಣಿ ಬಳಿ ತಲುಪಿದಾಗ ಪಕ್ಕದಲ್ಲಿ ಕುಳಿತಿದ್ದ ಆರೋಪಿ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಆರೋಪಿಗೆ ಬೈದಿದ್ದಾರೆ. ಬಳಿಕ ಈ ವಿಚಾರವನ್ನು ತಂದೆಗೆ ಕರೆ ಮಾಡಿ ತಿಳಿಸಿದ್ದಾರೆ.
ಬಸ್ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಾಗ ಆ ಯುವಕ ಬಸ್ಸಿನ ತುರ್ತು ನಿರ್ಗಮನ ಕಿಟಕಿಯ ಮೂಲಕ ಹೊರಗೆ ಹಾರಲು ಪ್ರಯತ್ನಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕರು ಆತನನ್ನು ಹಿಡಿದಿದ್ದಾರೆ. ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ: 56/2025 ಕಲಂ: 75 BNS 2023 ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
























