ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಲಲಿತ ಕಲಾ ಸಂಘ ಮತ್ತು ಐಕ್ಯೂ ಎಸಿ ಸಹಭಾಗಿತ್ವದಲ್ಲಿ “ಅನ್ವೇಷಣಾ 2” ಇದರ ಉದ್ಘಾಟನೆ ಮತ್ತು ಸಮಾರೋಪ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್, ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ಇಂತಹ ಕಾರ್ಯಕ್ರಮಗಳು ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹಾರೈಸಿದರು.
ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇಂತಹ ಸ್ಪರ್ಧೆಗಳನ್ನು ಈ ಕಾಲೇಜು ನಡೆಸುತ್ತಾ ಬರುತ್ತಿದ್ದು ಹೆಚ್ಚಿನ ವಿದ್ಯಾರ್ಥಿಗಳು ತಮ್ಮನ್ನು ವಿಭಿನ್ನ ರೀತಿಯಲ್ಲಿ ಪ್ರದರ್ಶಿಸುವಲ್ಲಿ ಯಶಸ್ವಿಗೊಳ್ಳುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಅನೇಕ ಸ್ಪರ್ಧೆಗಳನ್ನು ಆಯೋಜಿಸಿ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಅಕ್ಷಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕುಮಾರಿ ಗಂಗರತ್ನ, ಕಾಲೇಜಿನ ಉಪ ಪ್ರಾಂಶುಪಾಲ ರಕ್ಷಣ ಟಿ. ಆರ್, ಐಕ್ಯೂಎಸಿ ಸಂಯೋಜಕಿ ಶ್ರೀಮತಿ ರಶ್ಮಿ ಉಪಸ್ಥಿತರಿದ್ದರು.
ಪ್ರಥಮ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಲಲಿತ ಕಲಾ ಸಂಘದ ಸದಸ್ಯ ಕಿಶನ್ ಎನ್. ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಲಿತಕಲಾ ಸಂಘದ ಸಂಯೋಜಕಿ ಪ್ರಭಾವತಿ ವಿಜೇತರ ಪಟ್ಟಿ ವಾಚಿಸಿದರು. ಲಲಿತ ಕಲಾ ಸಂಘದ ಸದಸ್ಯೆ ಧನ್ಯಶ್ರೀ ವಂದಿಸಿದರು. ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಹರಿಶ್ಚಂದ್ರ ಕಾರ್ಯಕ್ರಮ ನಿರೂಪಿಸಿದರು.
























