ಬೆಂಗಳೂರು: ಬಿಜೆಪಿ ಜೊತೆ ಸೇರಿ ಚುನಾವಣಾ ಆಯೋಗ ಮತದಾರರಿಗೆ ವಂಚಿಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನದ ಮೇಲೆ ದಾಳಿ ಮಾಡುವ ಮುನ್ನ ಎರಡು ಬಾರಿ ಆಲೋಚಿಸಿ ಎಂದು ಚು. ಆಯೋಗಕ್ಕೆ ಎಚ್ಚರಿಸಿದ್ದಾರೆ.
ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಮತ ಕಳ್ಳತನದ ಬಗ್ಗೆ ಮಾತನಾಡಿದ ಅವರು, ಸಂವಿಧಾದ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದರೆ ನೀವು ಮತ್ತೊಮ್ಮೆ ಯೋಚಿಸಿ ಎಂದು ಹೇಳಿದ್ದಾರೆ. ನಾವು ನಿಮ್ಮನ್ನು ಒಂದೊಂದೇ ಪ್ರಕರಣದಲ್ಲಿ ಹಿಡಿಯುತ್ತೇವೆ. ಇದು ಕೊಂಚ ಸಮಯ ಹಿಡಿಯಬಹುದು. ಆದರೆ ನಾವು ನಿಮ್ಮನ್ನು ಹಿಡಿದೇ ಹಿಡಿಯುತ್ತೇವೆ ಎಂದು ಹೇಳಿದ್ದಾರೆ.
























