ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲು ಆಗ್ರಹ
ನವದೆಹಲಿ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್ನ ಮಹದೇವಪುರ ವಿಧಾನಸಭಾ ಕ್ಷೇತ್ರ ಮತ್ತು ಇತರ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪ ಸಂಬಂಧ ತನಿಖೆ ನಡೆಸಲು ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೆಂದು ಕೋರಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಎಂಬವರು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಿದ್ದಾರೆ.
ಅತ್ಯಂತ ಸೂಕ್ಷ್ಮ ಮತ್ತು ನಕಲಿ ಮತದಾರರ ಬಗ್ಗೆ ವಿವರಿಸಿದ ತಮ್ಮ ಅರ್ಜಿಯನ್ನು ಒಂದು ವಾರದೊಳಗೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಒಳಪಡಿಸಬಹುದು ಎಂದು ಅವರು ಹೇಳಿದ್ದಾರೆ. ಆಗಸ್ಟ್ 7ರಂದು ಪತ್ರಿಕಾಗೋಷ್ಠಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಆರೋಪಗಳನ್ನು ಉಲ್ಲೇಖಿಸಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ನ್ಯಾಯಾಲಯದ ಆದೇಶಗಳನ್ನು ಪಾಲಿಸುವವರೆಗೆ ಮತ್ತು ಪಟ್ಟಿಗಳ ಸ್ವತಂತ್ರ ಲೆಕ್ಕಪರಿಶೋಧನೆ ಪೂರ್ಣಗೊಳ್ಳುವವರೆಗೆ ಮತದಾರರ ಪಟ್ಟಿಗಳ ಯಾವುದೇ ಪರಿಷ್ಕರಣೆ ಅಥವಾ ಅಂತಿಮಗೊಳಿಸಬಾರದು ಎಂಬ ನಿರ್ದೇಶನಗಳನ್ನು ಪಾಂಡೆ ಕೋರಿದ್ದಾರೆ. ನಕಲಿ ಮತದಾರರನ್ನು ಪತ್ತೆಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳನ್ನು ಒಳಗೊಂಡಂತೆ ಮತದಾರರ ಪಟ್ಟಿಗಳ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗಕ್ಕೆ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಪಾಂಡೆ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.
ರಾಹುಲ್ ಗಾಂಧಿಯವರು ಮಾಡಿದ ಆರೋಪಗಳು ಸಾವಿರಾರು ಕಾನೂನುಬದ್ಧ ಮತದಾರರ ಹೆಸರುಗಳನ್ನು ಅಳಿಸುವುದು ಮತ್ತು ಕಾಲ್ಪನಿಕ ಅಥವಾ ನಕಲಿ ನೋಂದಣಿಗಳನ್ನು ಸೇರಿಸುವುದಕ್ಕೆ ಸಂಬಂಧಿಸಿವೆ. ಇದರಲ್ಲಿ ರಾಜಕೀಯ ಕಾರ್ಯಕರ್ತರು ಮತ್ತು ಸ್ಥಳೀಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
























