ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿಯನ್ನು ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಕಳವಳ
ಮಂಗಳೂರು : ಹಿಂದೂಗಳ ಸಂಖ್ಯೆ ಹೆಚ್ಚಾಗದೆ ಇದ್ದರೆ ಭಾರತ ಮತ್ತೊಂದು ಪಾಕಿಸ್ತಾನ ಆಗಲಿದೆ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಹಿಂದೂ ಸಂಸ್ಕೃತಿ ಸರ್ವನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ ಸಂಕಲ್ಪವನ್ನು ಸಂಘ ಪರಿವಾರ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿರುವ ಕೆಲಸ ಅದೇ ಆಗಿದೆ ಎಂದಿದ್ದಾರೆ.
ದೇಶ ಉಳಿಯಬೇಕು, ಹಿಂದೂ ಸಂಸ್ಕೃತಿ ಉಳಿಯಬೇಕು ಎಂಬುದು ನಮ್ಮ ಆಶಯ. ಅದ್ದರಿಂದ ಹಿಂದೂಗಳ ಸಂಖ್ಯೆ ಹೆಚ್ಚಾಗಬೇಕಿದೆ. ದೇಶದಲ್ಲಿ ಮೆಕಾಲೆ ಶಿಕ್ಷಣ ಪ್ರಭಾವ ಹೆಚ್ಚಾಗಿದೆ. ಎಲ್ಲರೂ ತಮ್ಮ ಭಾಷೆಗಳನ್ನು ಬಿಟ್ಟು ಇಂಗ್ಲಿಷ್ ಕಲಿಯಲು ಶುರು ಮಾಡಿದ್ದಾರೆ. ಆದರೆ ನಮ್ಮ ಸಂಸ್ಕೃತಿ ಉಳಿಯಬೇಕಾಗಿದೆ ಎಂದು ಹೇಳಿದ್ದಾರೆ.
ಸ್ವದೇಶಿ ವಸ್ತುಗಳನ್ನು ಬಳಸಿ ಎಂದು ಸಂಘ ಹೇಳುತ್ತಿದೆ. ನಾವು ಬೆಳಗ್ಗೆ ಎದ್ದು ಉಪಯೋಗಿಸುವ ಪೇಸ್ಟ್ನಿಂದ ಹಿಡಿದು ಎಲ್ಲವನ್ನೂ ಸ್ವದೇಶಿ ವಸ್ತು ಬಳಕೆ ಮಾಡಬೇಕು. ಈಗ ಸಂಘ ಪರಿವಾರ ಪಂಚ ಪರಿವರ್ತನೆ ಜಾರಿಗೆ ತರಲಿದೆ. ಸ್ವದೇಶಿ ಬ್ರಹ್ಮೋಸ್ ಪ್ರಯೋಗ ಮಾಡಿ ಅಪರೇಷನ್ ಸಿಂದೂರ ಹೆಸರಿನಲ್ಲಿ ಪಾಕಿಸ್ತಾನವನ್ನು ಪುಡಿ ಪುಡಿ ಮಾಡಿದ್ದೇವೆ ಎಂದಿದ್ದಾರೆ.
ನಕ್ಸಲ್ಗಳು ಈಗ ಕಾಡಿನಲ್ಲಿ ಇಲ್ಲ ನಾಡಿನಲ್ಲಿ ಇದ್ದಾರೆ. ನಾಡಿನಲ್ಲಿದ್ದು ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುತ್ತಿದ್ದಾರೆ. ನಾಡ ನಕ್ಸಲರ ಸಂಖ್ಯೆ ಈಗ ಹೆಚ್ಚಾಗುತ್ತಿದೆ ಎಂದು ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
























