ಗ್ಯಾರಂಟಿ ಸಮೀಕ್ಷೆ ಗೌರವ ಧನ ಕೊಡದಿರುವ ಹಿನ್ನೆಲೆಯಲ್ಲಿ ನಿರ್ಧಾರ
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ-2025ರಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.
ಸಮೀಕ್ಷೆ ವೇಳೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸಮೀಕ್ಷೆಯ ನಮೂನೆಯನ್ನು ವಿತರಿಸುವುದು ಸೇರಿ ಇತರ ಪೂರಕ ಕಾರ್ಯಗಳನ್ನು ನಿರ್ವಹಿಸಬೇಕು. ಸಮೀಕ್ಷೆ ನಮೂನೆ ವಿತರಿಸುವ ಜೊತೆಗೆ ಸಮೀಕ್ಷೆಯಲ್ಲಿರುವ 60 ಪ್ರಶ್ನೆಗಳಿಗೆ ಮಾಹಿತಿ ನೀಡಲು ಮುಂಚಿತವಾಗಿ ತಯಾರಿರುವಂತೆ ನೋಡಿಕೊಳ್ಳಬೇಕು. ವಿವರಗಳನ್ನು ಮೊಬೈಲ್ ಅಪ್ಲಿಕೇಶನ್ನಲ್ಲಿ ಅಪ್ಲೋಡ್ ಸೇರಿ ಇನ್ನಿತರ ಕಾರ್ಯ ಮಾಡಬೇಕು.
ಇದಕ್ಕಾಗಿ 2000 ರೂ. ಗೌರವಧನ ನಿಗದಿಗೊಳಿಸಲಾಗಿದೆ. ಆದರೆ, ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣ ಇನ್ನೂ ಪಾವತಿಸಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ.
ಸಮೀಕ್ಷೆ ಕಾರ್ಯ ಹೆಚ್ಚುವರಿ ಕೆಲಸವಾಗಿರುವುದರಿಂದ ಹೆಚ್ಚಿನ ಗೌರವಧನ ನೀಡುವುದು ಸೇರಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು. ಇದಕ್ಕೆ ಸರ್ಕಾರ ಒಪ್ಪಿದಲ್ಲಿ ಮಾತ್ರ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗುವುದಾಗಿ ಆಶಾ ಕಾರ್ಯಕರ್ತೆಯರು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಸಮೀಕ್ಷೆಗೆ ಆಶಾ ಕಾರ್ಯಕರ್ತರಿಗೆ 1,000 ರೂ. ನೀಡುವುದಾಗಿ ಭರವಸೆ ನೀಡಲಾಗಿತ್ತು, ಆದರೆ ಗೌರವ ಧನ ನೀಡಿಲ್ಲ. ಈ ಹಿಂದೆ ಮಾಡಿದ ಹಲವಾರು ಸಮೀಕ್ಷೆಗಳಿಗೆ ಹಣ ನೀಡಿಲ್ಲ. ಏಪ್ರಿಲ್ 1ರಿಂದ 10,000 ರೂ.ಗಳ ಮಾಸಿಕ ಗೌರವಧನದ ಭರವಸೆ ನೀಡಿದ್ದರೂ, ಇಲ್ಲಿಯವರೆಗೆ ಯಾವುದೇ ಪಾವತಿ ಮಾಡಲಾಗಿಲ್ಲ. ಬಜೆಟ್ನಲ್ಲಿ ಅಂಗನವಾಡಿ ಮತ್ತು ಮಧ್ಯಾಹ್ನದ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾತ್ರ 1,000 ರೂ. ವೇತನ ಹೆಚ್ಚಳದ ಭರವಸೆ ನೀಡಲಾಗಿದೆ. ಆದರೆ ಆಶಾ ಕಾರ್ಯಕರ್ತರನ್ನು ನಿರ್ಲಕ್ಷಿಸಲಾಗಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.
























