ಕಾಂಗ್ರೆಸ್ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಹಿರಿಯ ಶಾಸಕ
ಬೆಂಗಳೂರು: ಕಾಂಗ್ರೆಸ್ ಚುನಾವಣೆ ಗೆಲ್ಲಲು ನೀಡಿರುವ ಪಂಚ ಗ್ಯಾರಂಟಿಗಳು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದೆ ಎಂಬುದನ್ನು ಕಾಂಗ್ರೆಸ್ನ ಹಿರಿಯ ನಾಯಕ ಆರ್. ವಿ. ದೇಶಪಾಂಡೆ ಒಪ್ಪಿಕೊಂಡಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನುಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ನಿಜವಾಗಿದ್ದರೂ ಸರ್ಕಾರ ನಡೆಸಲು ಕಷ್ಟವಾಗುತ್ತಿದೆ ಎಂದಿದ್ದಾರೆ.
ಮಹಿಳೆಯರು ಎಲ್ಲ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನು ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನ ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ದೊಡ್ಡ ಹೊರೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಹೇಳಿದ್ದಾರೆ.
ಇನ್ನೂ 5 ಕೆಜಿ ಅಕ್ಕಿ ಬದಲಿಗೆ ಸರ್ಕಾರದಿಂದ ಇಂದಿರಾ ಕಿಟ್ ಕೊಡುವ ನಿರ್ಧಾರ ಕುರಿತು ಮಾತನಾಡ್ತಾ, ಮುಖ್ಯಮಂತ್ರಿಗಳು ಇಂದಿರಾ ಕಿಟ್ ಕೊಡ್ತಾರೋ ತೆಂಗಿನಕಾಯಿ ಕೊಡ್ತಾರೋ ನಮಗೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
























