ಫೀಲ್ಡಿಂಗ್ ಮಾಡುವಾಗ ಬಿದ್ದು ಗಂಭೀರ ಗಾಯ ಮಾಡಿಕೊಂಡಿರುವ ಯುವ ಕ್ರಿಕೆಟಿಗ
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅರ್ಧದಲ್ಲೇ ಮೈದಾನ ತೊರೆದಿದ್ದ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಯ್ಯರ್ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಪಕ್ಕೆಲುಬಿಗೆ ಗಾಯವಾಗಿ ಆಂತರಿಕ ರಕ್ತಸ್ರಾವವಾಗುತ್ತಿದೆ ಎಂದು ನಿನ್ನೆ ವರದಿಯಾದ ಹಿನ್ನೆಲೆಯಲ್ಲಿ ಆತಂಕ ಉಂಟಾಗಿತ್ತು. ಅವರ ಹೆತ್ತವರು ಆಸ್ಟ್ರೇಲಿಯಾಕ್ಕೆ ಹೋಗಲು ವಿಸಾ ಪಡೆಯಲು ಯತ್ನಿಸಿದ್ದರು. ಇದೀಗ ಶ್ರೇಯಸ್ ಅಯ್ಯರ್ ತುಸು ಚೇತರಿಸಿಕೊಂಡಿದ್ದು, ಅವರನ್ನು ಜನರಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರವಾಗಿದೆಯಾದರೂ ಅವರ ಆರೋಗ್ಯ ಸ್ಥಿರವಾಗಿದೆ. ಅಯ್ಯರ್ ಸ್ಥಿತಿ ಸುಧಾರಿಸುತ್ತಿದ್ದು, ಅವರನ್ನು ಈಗ ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಸಿಡ್ನಿಯಲ್ಲಿಯೇ ಬೀಡುಬಿಟ್ಟಿರುವ ಬಿಸಿಸಿಐ ವೈದ್ಯಕೀಯ ತಂಡವು ಶ್ರೇಯಸ್ ಅವರ ಗಾಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಅಯ್ಯರ್ ಅಪಾಯದಿಂದ ಪಾರಾಗಿದ್ದು, ಅವರ ಕೆಲವು ಸ್ನೇಹಿತರು ಅವರೊಂದಿಗೆ ಆಸ್ಪತ್ರೆಯಲ್ಲಿ ಇದ್ದಾರೆ. ಇದಲ್ಲದೆ, ವೀಸಾ ಔಪಚಾರಿಕತೆಗಳು ಪೂರ್ಣಗೊಂಡ ನಂತರ ಕುಟುಂಬದ ಸದಸ್ಯರು ಮುಂಬೈನಿಂದ ಸಿಡ್ನಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಅಯ್ಯರ್ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಇನ್ನೂ ಕೆಲವು ದಿನಗಳವರೆಗೆ ಸಿಡ್ನಿಯ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ.
ಅಕ್ಟೋಬರ್ 25ರಂದು ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿನ ಕೆಳಭಾಗಕ್ಕೆ ಗಂಭೀರ ಗಾಯವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸ್ಕ್ಯಾನಿಂಗ್ಗೆ ಒಳಪಡಿಸಿದ ಬಳಿಕ ಎಡ ಪಕ್ಕೆಲುಬಿನ ಕೆಳಭಾಗದಲ್ಲಿ ಆಂತರಿಕ ರಕ್ತಸ್ರಾವವಾಗಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಸಿಡ್ನಿಯಲ್ಲಿರುವ ತಜ್ಞ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ. ಭಾರತೀಯ ತಂಡದ ವೈದ್ಯರು ಶ್ರೇಯಸ್ ಅವರ ದೈನಂದಿನ ಪ್ರಗತಿಯನ್ನು ನಿರ್ಣಯಿಸಲು ಸಿಡ್ನಿಯಲ್ಲಿ ಅವರೊಂದಿಗೆ ಇರುತ್ತಾರೆ ಎಂದು ಬಿಸಿಸಿಐ ಪ್ರಕಟಣೆ ಹೊರಡಿಸಿದೆ.
























