ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮ ದಿನದ ಸ್ಮರಣಾರ್ಥ ಕಾರ್ಯಕ್ರಮ
ಮಂಗಳೂರು : ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನದ ಸ್ಮರಣಾರ್ಥ ಯುವಜನ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯವು ದೇಶಾದ್ಯಂತ ‘ಸರ್ದಾರ್@ 150 ಏಕತಾ ನಡಿಗೆʼಯನ್ನು ಹಮ್ಮಿಕೊಂಡಿದೆ. ಅದರಂತೆ, ದಕ್ಷಿಣ ಕನ್ನಡದಲ್ಲಿಯೂ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದಕ್ಕೆ ನಿರ್ಧರಿಸಲಾಗಿದ್ದು, ಮಂಗಳೂರಿನಲ್ಲಿ ನ.10ರಂದು ಹಾಗೂ ಪುತ್ತೂರಿನಲ್ಲಿ ನ.12ರಂದು ಪಾದಯಾತ್ರೆ ನಡೆಸಲಾಗುವುದು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ನ.10ರಂದು ಬೆಳಗ್ಗೆ 9.30ಕ್ಕೆ ಅಂಬೇಡ್ಕರ್ ವೃತ್ತದಿಂದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಏಕತಾ ನಡಿಗೆ ನಡೆಯಲಿದೆ. ಹಾಗೆಯೇ, ಪುತ್ತೂರಿನಲ್ಲಿ ನ.12ರಂದು ಬೆಳಗ್ಗೆ 9.30 ಗಂಟೆಗೆ ವಿವೇಕಾನಂದ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಾಲಯದವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ. ಯುವಕರು, ಎನ್ಎಸ್ಎಸ್ ಸ್ವಯಂಸೇವಕರು, ಎನ್ಸಿಸಿಯವರು, ವಿವಿಧ ಸಾಂಸ್ಕೃತಿಕ ತಂಡಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಈ ಏಕತಾ ನಡಿಗೆಯನ್ನು ಯಶಸ್ವಿಗೊಳಿಸಬೇಕು. ಜನರ ಪಾಲ್ಗೊಳ್ಳುವಿಕೆಯಿಂದ ರಾಷ್ಟ್ರ ನಿರ್ಮಾಣ ಮಾಡುವ ಪ್ರಧಾನಮಂತ್ರಿಗಳ ಸಂಕಲ್ಪಕ್ಕೆ ಜನತೆಯು ಹೆಚ್ಚಿನ ಉತ್ಸಾಹ-ಉತ್ಸುಕತೆಯಿಂದ ಕೈಜೋಡಿಸಬೇಕು ಎಂದು ಕ್ಯಾ.ಚೌಟ ಮನವಿ ಮಾಡಿದ್ದಾರೆ.
ಈ ಪಾದಯಾತ್ರೆಗೂ ಮೊದಲು ಯುವ ಜನಾಂಗದಲ್ಲಿ ಜಾಗೃತಿ ಮೂಡಿಸಲು ಶಾಲೆ ಹಾಗೂ ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗುವುದು. ವಿದ್ಯಾರ್ಥಿಗಳಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜೀವನ-ಆದರ್ಶಗಳ ಕುರಿತು ಪ್ರಬಂಧ, ಚರ್ಚಾ ಸ್ಪರ್ಧೆಗಳು, ವಿಚಾರ ಸಂಕಿರಣ, ಬೀದಿ ನಾಟಕಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕವೂ ಈ ಏಕತಾ ನಡಿಗೆ ಭಾಗವಾಗಿ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುವುದು. ಈ ಹಿನ್ನಲೆಯಲ್ಲಿ ದೇಶವ್ಯಾಪಿ ರೀಲ್ಸ್ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಮತ್ತು ಸರ್ದಾರ್ @ 150 ಯಂಗ್ ಲೀಡರ್ಸ್ ಎನ್ನುವ ಕಾರ್ಯಕ್ರಮಕ್ಕೆ ಈಗಾಗಲೇ ಕೇಂದ್ರ ಸಚಿವ ಡಾ.ಮನಸುಖ್ ಮಾಂಡವಿಯಾ ಅವರು ಚಾಲನೆ ನೀಡಿದ್ದಾರೆ. ಈ ಸ್ಪರ್ಧೆಯಲ್ಲಿ ದೇಶದೆಲ್ಲೆಡೆಯಿಂದ ಆಯ್ಕೆಯಾಗುವ 150 ಮಂದಿ ವಿಜೇತರು ರಾಷ್ಟ್ರೀಯಮಟ್ಟದಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ. ಈ ರಾಷ್ಟ್ರಮಟ್ಟದ ಏಕತಾ ನಡಿಗೆಯು ನ.26ರಿಂದ ಡಿ.6ರವರೆಗೆ ಕರಮಸದ್ನಿಂದ ಸ್ಟ್ಯಾಚ್ಯೂ ಆಫ್ ಯೂನಿಟಿವರೆಗೆ ಒಟ್ಟು 152 ಕಿ.ಮೀ. ದೂರ ನಡೆಯಲಿದೆ ಎಂದು ಕ್ಯಾ. ಚೌಟ ವಿವರಿಸಿದ್ದಾರೆ.
ಈ ಪಾದಯಾತ್ರೆಯ ದಿನದಂದು ‘ನಶೆ ಮುಕ್ತ ಭಾರತ’ ಮತ್ತು ‘ಗರ್ವ್ ಸೆ ಸ್ವದೇಶಿʼ ಪ್ರತಿಜ್ಞೆಯನ್ನು ಕೂಡ ಸ್ವೀಕರಿಸಲಾಗುತ್ತದೆ. ಅಲ್ಲದೆ, ಈ ಪಾದಯಾತ್ರೆಯುದ್ದಕ್ಕೂ ಅಂಗಡಿ ಮುಂಗಟ್ಟಿನವರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸರ್ದಾರ್ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಈ ಅಭಿಯಾನವನ್ನು ಮತ್ತಷ್ಟು ಅರ್ಥಪೂರ್ಣವಾಗಿಸಬೇಕು ಕ್ಯಾ.ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ.
ಈ ಏಕತಾ ನಡಿಗೆ ಸಂಬಂಧಿಸಿದ ಎಲ್ಲ ನೋಂದಣಿ ಮತ್ತು ಚಟುವಟಿಕೆಗಳನ್ನು ‘ಮೈ ಭಾರತ್ʼ ಪೋರ್ಟಲ್ ಮೂಲಕ ನಡೆಸಲಾಗುತ್ತಿದೆ: ಹೀಗಾಗಿ, ಸಾರ್ವಜನಿಕರು https://mybharat.gov.in/pages/unity march ನಲ್ಲಿ ನೋಂದಣಿ ಮಾಡಿಕೊಂಡು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಂಸದ ಕ್ಯಾ.ಚೌಟ ಅವರು ಕೋರಿದ್ದಾರೆ.
























