ಉಡುಪಿಯಲ್ಲೂ ಪತ್ತೆಯಾದರು ಪಾಕ್‌ ಬೇಹುಗಾರರು

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಸೆರೆ

ಹಡಗುಗಳಿಗೆ ಸಂಬಂಧಿಸಿದ ರಹಸ್ಯ ತಾಂತ್ರಿಕ ಮಾಹಿತಿ ಪಾಕ್‌ಗೆ ರವಾನೆ

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಬಂಧಿಸಲಾಗಿದೆ. ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ. ಇವರು ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು.





















































 
 

ಕೊಚ್ಚಿನ್ ಶಿಪ್‌ಯಾರ್ಡ್ ಭಾರತೀಯ ನೌಕಾಪಡೆಗೆ ಟಗ್‌ಗಳನ್ನು ನಿರ್ಮಿಸಿ ಕೊಡುವ ಸಂಸ್ಥೆಯಾಗಿದ್ದು, ಖಾಸಗಿ ಸಂಸ್ಥೆಗಳಿಗೂ ಹಡಗುಗಳನ್ನು ನಿರ್ಮಿಸಿಕೊಡುತ್ತಿದೆ. ಈ ಸಂಸ್ಥೆಯ ಪ್ರಧಾನ ಕಚೇರಿ ಕೇರಳದಲ್ಲಿದೆ.

ಒಂದೂವರೆ ವರ್ಷದಿಂದ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತ್ತಿದ್ದ ಆರೋಪಿಗಳು
ಹಡಗುಗಳಿಗೆ ಸಂಬಂಧಿಸಿದ ಗೋಪ್ಯ ಮಾಹಿತಿ, ರಹಸ್ಯ ತಾಂತ್ರಿಕ ಮಾಹಿತಿಗಳನ್ನು ವಾಟ್ಸ್​ಆ್ಯಪ್‌ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎಂಬ ಗಂಭೀರ ವಿಚಾರ ಈಗ ಬಯಲಾಗಿದೆ. ಕೇರಳದಲ್ಲಿ ಕೆಲಸ ಮಾಡುವ ಸಮಯದಲ್ಲಿ ರೋಹಿತ್ ಹಲವು ಬಾರಿ ಮಾಹಿತಿ ಹಂಚಿಕೊಂಡಿದ್ದು, ಮಲ್ಪೆಗೆ ಬರುವವರೆಗೂ ಈ ಚಟುವಟಿಕೆ ಮುಂದುವರಿದಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಈ ಕುರಿತು ಕೊಚ್ಚಿನ್ ಶಿಪ್‌ಯಾರ್ಡ್ ಸಿಇಒ ಅನುಮಾನದ ಮೇರೆಗೆ ನೀಡಿದ ದೂರಿನ ಆಧಾರದಲ್ಲಿ ಉಡುಪಿ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅವರ ವಿರುದ್ಧ ದೇಶದ ಸಾರ್ವಭೌಮತೆಗೆ ಧಕ್ಕೆ ತರುವ, ಗೌಪ್ಯ ಮಾಹಿತಿ ಮಾರಾಟ ನಡೆಸಿದ ಆರೋಪಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮಾಹಿತಿ ಹಂಚಿಕೆ ಮಾಡಿ ಹಣ ಪಡೆಯುತ್ತಿದ್ದರೆಂಬ ಅಂಶವೂ ತನಿಖೆಯಿಂದ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಗಳು ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಈ ಪ್ರಕರಣ ಸದ್ಯ ದೇಶದ ಭದ್ರತೆ ದೃಷ್ಟಿಯಿಂದ ಗಂಭೀರ ಆತಂಕ ಉಂಟುಮಾಡಿದೆ. ಉಡುಪಿ ಪೊಲೀಸರು ಆರೋಪಿಗಳ ಜಾಲದ ಮೂಲ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

error: Content is protected !!
Scroll to Top