ಸಿಎಂಗೆ ನಾನ್ವೆಜ್ ತಿನ್ನಿಸಿ ತಾನು ವೆಜ್ ಮಾತ್ರ ತಿಂದ ಡಿಕೆಶಿ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಣ ‘ಬ್ರೇಕ್ಫಾಸ್ಟ್ ಮೀಟಿಂಗ್’ ಮುಂದುವರಿದಿದೆ. ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು. ಜತೆಗೆ ಮಾತುಕತೆಯೂ ನಡೆಯಿತು. ಆದರೆ ಡಿ.ಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್ವೆಜ್ ಸೇವಿಸಲಿಲ್ಲ.
ಕಾವೇರಿ ನಿವಾಸದಿಂದ ಒಬ್ಬರೇ ಹೊರಟ ಸಿದ್ದರಾಮಯ್ಯ ಬೆಳಗ್ಗೆ 9.40ರ ವೇಳೆಗೆ ಡಿಕೆಶಿಯ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಿದರು. ಸಿಎಂ ಆಗಮಿಸಿದ ಕೂಡಲೇ ಡಿಕೆಶಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕುಣಿಗಲ್ ರಂಗನಾಥ್ ಅವರು ಸಿಎಂ ಕಾಲಿಗೆ ಅಡ್ಡ ಬಿದ್ದು ನಮಸ್ಕರಿಸಿದರು. ಆರಂಭದಲ್ಲಿ ಸಿಎಂ ಜೊತೆ ಕೆಲ ಶಾಸಕರು ಡಿಕೆಶಿ ಮನೆಗೆ ಬರಲಿದ್ದಾರೆ ಎಂಬ ಸುದ್ದಿ ಬಂದಿತ್ತು. ಆದರೆ ಸಿಎಂ ಜೊತೆ ಬೇರೆ ಶಾಸಕರು ಆಗಮಿಸಲಿಲ್ಲ.
ಕಳೆದ ಶನಿವಾರ ಸಿಎಂ ಕಾವೇರಿ ನಿವಾಸದಲ್ಲಿ ಡಿಸಿಎಂಗೆ ಬ್ರೇಕ್ಫಾಸ್ಟ್ ಆಯೋಜನೆ ಮಾಡಲಾಗಿತ್ತು. ಅಂದೇ ಸಿಎಂಗೂ ತಮ್ಮ ಮನೆಗೆ ಬ್ರೇಕ್ಫಾಸ್ಟ್ಗೆ ಬರುವಂತೆ ಡಿಕೆಶಿ ಆಹ್ವಾನಿಸಿದ್ದರು. ಹೀಗಾಗಿ ಸಿಎಂಗೆ ಡಿಸಿಎಂ ಬ್ರೇಕ್ಫಾಸ್ಟ್ ಆತಿಥ್ಯ ಇರಲಿದ್ದು, ಸಹಜವಾಗಿ ರಾಜಕೀಯ ಕುತೂಹಲ ಮೂಡಿಸಿದೆ.
ಸಿದ್ದರಾಮಯ್ಯನವರಿಗೆ ನಾಟಿ ಕೋಳಿ ಇಷ್ಟ ಎನ್ನುವ ಕಾರಣಕ್ಕೆ ಬೆಳಗ್ಗಿನ ತಿಂಡಿಗೆ ನಾಟಿ ಕೋಳಿ ಸಾರಿನ ಆತಿಥ್ಯ ನೀಡಿದ್ದಾರೆ. ಬೆಳಗ್ಗೆ ತಿಂಡಿಗೆ ಇಡ್ಲಿ ನಾಟಿ ಕೋಳಿ ಸಾರು ಹಾಗೂ ನಾಟಿಕೋಳಿ ಫ್ರೈ ಸ್ಪೆಷಲ್ ಮೆನು ಸಿದ್ಧಪಡಿಸಲಾಗಿತ್ತು. ಡಿಕೆಶಿಯ ಸರ್ಕಾರಿ ನಿವಾಸದಲ್ಲಿ ಸಾಕಿದ್ದ ಕನಕಪುರದ ನಾಟಿ ಕೋಳಿಯನ್ನೇ ಸಿಎಂಗೆ ಉಣಬಡಿಸಲಾಗಿದೆ.
























