ಬೆಳಗಾವಿಯಲ್ಲೂ ಮುಂದುವರಿದ ಕುರ್ಚಿ ಕಿತ್ತಾಟ : ಆಪ್ತರಿಗೆ ಡಿನ್ನರ್‌ ಮೀಟಿಂಗ್‌

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರಿಂದ ಆಪ್ತರಿಗೆ ಪ್ರತ್ಯೇಕವಾಗಿ ಭೋಜನ ಕೂಟ

ಬೆಳಗಾವಿ : ಬ್ರೇಕ್‌ಫಾಸ್ಟ್‌ ಪಾಲಿಟಿಕ್ಸ್‌ ಆಯಿತು, ಈಗ ಡಿನ್ನರ್‌ ಪಾಲಿಟಿಕ್ಸ್‌ ಸರದಿ. ಎಷ್ಟೇ ತೇಪೆ ಹಾಕಿದರೂ ಕಾಂಗ್ರೆಸ್‌ನ ಕುರ್ಚಿ ಕಿತ್ತಾಟ ಶಮನವಾಗುತ್ತಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದ ಮಧ್ಯೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವಿನ ಶೀತಲ ಸಮರವೂ ಜೋರಾಗಿದೆ. ಸಿದ್ದರಾಮಯ್ಯ ಆಪ್ತರು ನಡೆಸಿದ ಡಿನ್ನರ್ ಸಭೆಯ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಗುರುವಾರ ರಾತ್ರಿ ಆಪ್ತರಿಗಾಗಿ ವಿಶೇಷ ಡಿನ್ನರ್ ಮೀಟಿಂಗ್ ಆಯೋಜಿಸಿದ್ದಾರೆ. ಬೆಳಗಾವಿ ಹೊರವಲಯದಲ್ಲಿರುವ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ನಡೆದ ಈ ಡಿನ್ನರ್ ಸಭೆಯಲ್ಲಿ ಐವರು ಸಚಿವರು ಸೇರಿ 30ಕ್ಕೂ ಹೆಚ್ಚು ಶಾಸಕರು ಭಾಗಿಯಾಗಿದ್ದಾರೆ. ಸಚಿವರಾದ ಎಂ.ಸಿ. ಸುಧಾಕರ್, ಮಂಕಾಳ ವೈದ್ಯ, ಕೆ.ಎಚ್. ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಅನೇಕ ಶಾಸಕರು ಸಭೆಗೆ ಹಾಜರಾಗಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಡಿನ್ನರ್ ಮೀಟಿಂಗ್​ಗೆ ಡಿಸಿಎಂ ಆಪ್ತ ಹಾಗೂ ಖ್ಯಾತ ಮೈನಿಂಗ್ ಉದ್ಯಮಿ ದೊಡ್ಡಣ್ಣವರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅವರ ಆತಿಥ್ಯದಲ್ಲಿ ಸಭೆ ಜರುಗಿದೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ನಿನ್ನೆ ಬೆಳಗ್ಗೆಯೇ ಬೆಳಗಾವಿಗೆ ಆಗಮಿಸಿ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡಿದ್ದರೆಂದು ತಿಳಿದು ಬಂದಿದೆ.





















































 
 

ಬುಧವಾರ ರಾತ್ರಿ ಮಾಜಿ ಶಾಸಕ ಫಿರೋಜ್ ಸೇಠ್ ಅವರ ನಿವಾಸದಲ್ಲಿ ನಡೆದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯದ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಬಣದ ಯಾವೊಬ್ಬ ಶಾಕರೂ ಭಾಗವಹಿಸಿರಲಿಲ್ಲ. ಇದೀಗ ಡಿಸಿಎಂ ಬಣ ಪ್ರತ್ಯೇಕ ಡಿನ್ನರ್ ಮೀಟಿಂಗ್ ನಡೆಸಿರುವುದು ಕುತೂಹಲಕ್ಕೆ ಕಾರಣವಾಗದೆ.

ಡಿ.ಕೆ ಶಿವಕುಮಾರ್ ಅವರ ಡಿನ್ನರ್ ಮೀಟಿಂಗ್‌ನಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸಚಿವ ಶರಣ ಪ್ರಕಾಶ್ ಪಾಟೀಲ್, ಸಚಿವ ಎಂ.ಸಿ.ಸುಧಾಕರ್, ಸಚಿವ ಮಂಕಾಳ ವೈದ್ಯ, ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ್, ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್, ಶೃಂಗೇರಿ ಶಾಸಕ ಟಿ,ಡಿ.ರಾಜೇಗೌಡ, ಪುಲಕೇಶಿನಗರ ಶಾಸಕ ಎ.ಸಿ.ಶ್ರೀನಿವಾಸ್, ಮಾಲೂರು ಶಾಸಕ ಕೆ.ಎನ್.ನಂಜೇಗೌಡ, ಆನೇಕಲ್ ಶಾಸಕ ಆನೇಕಲ್ ಶಿವಣ್ಣ, ಕೋಲಾರ ಶಾಸಕ ಕೊತ್ತನೂರು ಮಂಜುನಾಥ್, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಚಿಕ್ಕೋಡಿ-ಸದಲಗಾ ಶಾಸಕ ಗಣೇಶ್ ಹುಕ್ಕೇರಿ, ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್, ಬಾದಾಮಿ ಶಾಸಕ ಭೀಮಸೇನ್ ಚಿಮ್ಮನಕಟ್ಟಿ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಪರಿಷತ್ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ ಇವರಲ್ಲದೆ ಬಿಜೆಪಿ ಉಚ್ಚಾಟಿತ ಶಾಸಕ ಎಸ್‌.ಟಿ ಸೋಮಶೇಖರ್ ಕೂಡ ಭಾಗಿಯಾಗಿದ್ದಾರೆ. ಇನ್ನು ಬಿಜೆಪಿಯ ಉಚ್ಚಾಟಿತ ಮತ್ತೊಬ್ಬ ಶಾಸಕರಾದ ಶಿವರಾಮ್ ಹೆಬ್ಬಾರ್ ಮೊದಲೇ ಬಂದು ವಾಪಸ್ ಆದರು ಎಂದು ತಿಳಿದುಂಬದಿದೆ.

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆಯೇ ಡಿಕೆಶಿ ಕರೆದಿದ್ದ ಡಿನ್ನರ್ ಮೀಟಿಂಗ್‌ನಲ್ಲಿ ಹೆಚ್ಚು ಚರ್ಚೆಯಾಗಿದೆ. ಯತೀಂದ್ರಗೆ ನೋಟೀಸ್ ಕೊಡಿ ಎಂದು ಕೆಲ ಶಾಸಕರು ಡಿಕೆಶಿಗೆ ಒತ್ತಡ ಹಾಕಿದ್ದಾರೆ. ಈ ವೇಳೆ ಎಲ್ಲದಕ್ಕೂ ಸರಿಯಾಗಿ ಉತ್ತರ ಕೊಡುತ್ತೇನೆ, ಕಾಯಿರಿ ಎಂದು ಡಿಕೆಶಿ ತಿಳಿಸಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲ, ಮುಂದಿನ ವಾರ ಡಿಕೆಶಿ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ಕೂಡ ಚರ್ಚೆಯಾಗಿದೆ. ಸಿಎಂ ಬದಲಾವಣೆ ವಿಚಾರ ಡಿನ್ನರ್ ಮೀಟಿಂಗ್‌ನಲ್ಲಿ ಚರ್ಚೆಯಾಗಿದ್ದು, ಅಗತ್ಯ ಬಿದ್ದರೆ ಹೈಕಮಾಂಡ್ ಭೇಟಿಗೆ ಹೋಗುತ್ತೇವೆ ಎಂದು ಕೆಲವು ಶಾಸಕರು ಡಿಕೆ ಶಿವಕುಮಾರ್‌ಗೆ ತಿಳಿಸಿದ್ದಾರೆ. ‘ನಿಮಗೆ ಮುಖ್ಯಮಂತ್ರಿ ಸ್ಥಾನವನ್ನು ಕೊಡಲೇಬೇಕು’. ‘ಈ ಬಗ್ಗೆ ಹೈಕಮಾಂಡ್‌ಗೆ ಮನವಿ ಮಾಡ್ಕೊಳ್ಳುತ್ತೇವೆ’ ಹೀಗಂತ ಕೆಲ ಶಾಸಕರು ಡಿಕೆಶಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

error: Content is protected !!
Scroll to Top