ತುಮಕೂರು: ಬಾಂಬ್ ಬೆದರಿಕೆಯೊಂದು ಇ-ಮೇಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಇಂದು ಬಂದಿದ್ದು, ಇದರಿಂದಾಗಿ ಕೆಲಕಾಲ ಜಿಲ್ಲಾಡಳಿತ ಕಚೇರಿಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.
ಬೆಳಗ್ಗೆ ಸುಮಾರು 7 ಗಂಟೆಯ ಸಮಯಕ್ಕೆ ಈ ಬೆದರಿಕೆ ಇ-ಮೇಲ್ ಡಿಸಿ ಅವರ ಅಧಿಕೃತ ಮೇಲ್ ಐಡಿಗೆ ಬಂದಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಕಚೇರಿಗೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ, ಹಿರಿಯ ಪೊಲೀಸ್ ಅಧಿಕಾರಿಗಳ ದಳ ಧಾವಿಸಿ ಪರಿಶೀಲನೆ ನಡೆಸಿದೆ.
ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಕಚೇರಿ ಮತ್ತು ಆಸುಪಾಸಿನಲ್ಲಿ ಶೋಧ ಕಾರ್ಯ ನಡೆದಿದ್ದು, ಈ ವೇಳೆ ಯಾವುದೇ ಸ್ಪೋಟಕ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಖಚಿತವಾದ ಬಳಿಕ ಕಚೇರಿಯೊಳಕ್ಕೆ ಹೋಗಲು ಅಧಿಕಾರಿಗಳು, ಸಿಬ್ಬಂದಿ ಗಳಿಗೆ ಅನುಮತಿಸಲಾಯಿತು.
ಕಾರ್ಯಾಚರಣೆಯ ಮಾತನಾಡಿದ ಎಸ್ಪಿ ಅಶೋಕ್, ಬೆಳಗ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ತಕ್ಷಣ ನಾವು ಎಚ್ಚೆತ್ತುಕೊಂಡು ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳವನ್ನು ಕರೆಸಿ ಪರಿಶೀಲನೆ ನಡೆಸಿದೆವು. ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ. ಇದೊಂದು ಗಂಭೀರ ವಿಚಾರ. ನಾವು ಕೂಡಲೇ ಎಫ್ಐಆರ್ ದಾಖಲಿಸಿ ಕೂಲಂಕಷ ತನಿಖೆ ಕೈಗೊಳ್ಳುತ್ತೇವೆ. ಇ-ಮೇಲ್ನ ಹೆಡರ್ ಕನ್ನಡದಲ್ಲಿದ್ದರೂ, ಬಾಡಿ (ವಿಷಯ) ಇಂಗ್ಲಿಷ್ನಲ್ಲಿರುವುದರ ಬಗ್ಗೆಯೂ ತನಿಖೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಎರಡು-ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಡಿಸಿ ಕಚೇರಿಯ ಪ್ರವೇಶದ್ವಾರದಲ್ಲಿ ಮೆಟೆಲ್ ಡಿಟೆಕ್ಟರ್ ಅಳವಡಿಸಿ, ಎಲ್ಲರನ್ನೂ ಕಡ್ಡಾಯವಾಗಿ ಪರಿಶೀಲಿಸಿದ ನಂತರವೇ ಒಳಗೆ ಬಿಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಇತರ ಪ್ರಮುಖ ಸ್ಥಳಗಳನ್ನೂ ಪರಿಶೀಲಿಸಲಾಗುವುದು ಎಂದು ಹೇಳಿದರು.
























