ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ MLC ಕಿಶೋರ್ ಕುಮಾರ್ ಪುತ್ತೂರು ಮನವಿ

ಪುತ್ತೂರು: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಅರ್ಹ ವಿದ್ಯಾರ್ಹತೆ ಪಡೆದ ಲಕ್ಷಾಂತರ ಯುವಜನತೆಗಳು ಸರ್ಕಾರಿ ಉದ್ಯೋಗಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಿ ನಿರೀಕ್ಷೆಯಲ್ಲಿ ಕಾಯುತ್ತಿರುವ ಈ ಸಂದರ್ಭದಲ್ಲಿ, ಖಾಲಿ ಹುದ್ದೆಗಳ ಭರ್ತಿ ವಿಳಂಬವಾಗುತ್ತಿರುವುದು ಗಂಭೀರ ವಿಷಯವಾಗಿದೆ.

ಈ ಹಿನ್ನೆಲೆ ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು, 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಅಗತ್ಯ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದರಿಂದ ಉದ್ಯೋಗಾಕಾಂಕ್ಷಿ ಯುವಜನತೆಗೆ ಸರ್ಕಾರಿ ಉದ್ಯೋಗಾವಕಾಶ ಸಿಗುವುದರ ಜೊತೆಗೆ, ಖಾಲಿ ಹುದ್ದೆಗಳ ಭರ್ತಿಯಿಂದ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ಸುಗಮವಾಗಿ ಲಭ್ಯವಾಗಲಿದ್ದು, ಆಡಳಿತ ವ್ಯವಸ್ಥೆಯೂ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂಬುದನ್ನು ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಈ ಕುರಿತು ಕ್ರಮ ಕೈಗೊಳ್ಳುವಂತೆ ಕೋರಿ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಖಾಲಿ ಹುದ್ದೆಗಳ ಭರ್ತಿಯು ಯುವಜನತೆಗೆ ಉದ್ಯೋಗ ಭದ್ರತೆ ಒದಗಿಸುವುದರ ಜೊತೆಗೆ ರಾಜ್ಯದ ಆಡಳಿತ ಬಲಪಡಿಸುವುದಾಗಿ ಅವರು ಮನವಿಯಲ್ಲಿ ತಿಳಿಸಿದರು.





















































 
 

ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿ, ಈ ವಿಷಯವನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ, ಸದರಿ ಬೇಡಿಕೆಯಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

error: Content is protected !!
Scroll to Top