ಕ್ರಿಕೆಟ್ ಅಭಿಮಾನಿಗಳ ಉತ್ಸಾಹಕ್ಕೆ ತಣ್ಣೀರು ಎರಚಿದ ಮುನ್ಸೂಚನೆ
ಕೊಲಂಬೊ: ಹಲವು ಅಡ್ಡಿಗಳ ಬಳಿಕ ಕೊನೆಗೂ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಆಡಲು ಪಾಕಿಸ್ತಾನ ಒಪ್ಪಿಕೊಂಡಿದೆ. ಭಾನುವಾರ ಶ್ರೀಲಂಕಾದಲ್ಲಿ ನಡೆಯಲಿರುವ ಈ ಹೈ ವೋಲ್ಟೇಜ್ ಪಂದ್ಯವನ್ನು ನೋಡಲು ಕ್ರಿಕೆಟ್ ಅಭಿಮಾನಗಳು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಿರುವಾಗ ಅವರ ಕುತೂಹಲಕ್ಕೆ ತಣ್ಣೀರು ಎರಚುವ ಸುದ್ದಿಯ್ನು ಹವಾಮಾನ ಇಲಾಖೆ ನೀಡಿದೆ. ಭಾರತ ಮತ್ತು ಪಾಕಿಸ್ತಾನ ಮಧ್ಯೆ ಭಾನುವಾರ ನಡೆಯುವ ರಣರೋಚಕ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶ್ರೀಲಂಕಾದ ಕೊಲಂಬೋದಲ್ಲಿ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪಂದ್ಯ ನಿಗದಿಯಾಗಿದೆ. ಆದರೆ ಈ ಪಂದ್ಯಕ್ಕೆ ಮೊದಲು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
ಫೆಬ್ರವರಿ 15ರ ಸುಮಾರಿಗೆ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಶ್ರೀಲಂಕಾದ ಹವಾಮಾನ ಇಲಾಖೆಯ ಹೇಳಿಕೆಯಲ್ಲಿ ತಿಳಿಸಿದೆ. ಅಕ್ಯೂವೆದರ್ ಪ್ರಕಾರ, ಪಂದ್ಯ ಪ್ರಾರಂಭವಾಗುವ ಎರಡು ಗಂಟೆಗಳ ಮೊದಲು ಸಂಜೆ 5 ಗಂಟೆಯ ಸುಮಾರಿಗೆ ಮಳೆಯಾಗುವ ಸಾಧ್ಯತೆಯಿದೆ. ಹೀಗಿದ್ದರೂ ಪಂದ್ಯ ನಡೆಯುವ ಮಳೆ ಬರುವ ಸಾಧ್ಯತೆ ಕಡಿಮೆ ಎಂದು ಹೇಳಿದೆ.
ಬಾಂಗ್ಲಾದೇಶದ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರ ಮಾಡದ್ದಕ್ಕೆ ಪಾಕಿಸ್ತಾನ ಆರಂಭದಲ್ಲಿ ಟೀಂ ಇಂಡಿಯಾ ವಿರುದ್ಧ ಆಡುವುದಿಲ್ಲ ಎಂದು ಹೇಳಿತ್ತು. ನಂತರ ಐಸಿಸಿ ನೀಡಿದ ಎಚ್ಚರಿಕೆಯ ಬಳಿಕ ಪಂದ್ಯ ಆಡಲು ಒಪ್ಪಿಗೆ ನೀಡಿತ್ತು.
























