2017ರಲ್ಲಿ ನಗರದಲ್ಲಿ ನಡೆದ ಲಾಠಿಚಾರ್ಜ್ ಪ್ರಕರಣ
ಮಂಗಳೂರು : ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಏ.4ರಂದು ನಡೆದ ಲಾಠಿಚಾರ್ಜ್ ಪ್ರಕರಣದ ಎಲ್ಲ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಹ್ಮದ್ ಖುರೇಶಿ ಎಂಬಾತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸದೆ ದೌರ್ಜನ್ಯ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾಗಿದ್ದರು.
ಈ ಸಂದರ್ಭ ಪರಿಸ್ಥಿತಿ ಉದ್ವಿಗ್ನಗೊಂಡ ಬಳಿಕ ಕಲ್ಲು ತೂರಾಟ ನಡೆದಿದೆ ಎಂಬ ಆರೋಪದಲ್ಲಿ ಹಲವರ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ 101 ಮಂದಿಯ ವಿರುದ್ಧ ಅಂತಿಮ ವರದಿ ಸಲ್ಲಿಸಲಾಗಿತ್ತು. ಆ ಪೈಕಿ ಎರಡು ಪ್ರಕರಣಗಳು ಎರಡನೇ ಜೆಎಂಎಫ್ಸಿ ನ್ಯಾಯಾಲಯ ಮತ್ತು ಇನ್ನೊಂದು ಪ್ರಕರಣದ ಬಗ್ಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.
ಆರೋಪಗಳನ್ನು ಸಾಬೀತುಪಡಿಸಲು ಸರಕಾರಿ ಪರ ವಕೀಲರು ವಿಫಲವಾಗಿದ್ದಾರೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟು ಪ್ರಕರಣದಿಂದ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ.

























