ಸೀಸಿಯಮ್ ವಿಕಿರಣ ಹಾಯಿಸಿ ಸ್ಫೋಟಿಸುವ ಎಚ್ಚರಿಕೆ
ನಾಗಪುರ : ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಮತ್ತು ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಗುರಿಯಾಗಿಸಿಕೊಂಡು ವಿಕಿರಣಶೀಲ ವಸ್ತುಗಳ ಮೂಲಕ ದಾಳಿ ನಡೆಸುವ ಬೆದರಿಕೆ ಪತ್ರವೊಂದು ಪೊಲೀಸ್ ಇಲಾಖೆಗೆ ಲಭ್ಯವಾಗಿದೆ. ಪತ್ರದ ಗಂಭೀರತೆಯನ್ನು ಅರಿತ ಪೊಲೀಸ್ ಆಯುಕ್ತರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ.
ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಭಯೋತ್ಪಾದನಾ ನಿಗ್ರಹ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಮುಂಬೈನಿಂದ ಆಗಮಿಸಿದ ಪರಮಾಣು ಶಕ್ತಿ ತಜ್ಞರ ವಿಶೇಷ ತಂಡ ನಗರದ ಪ್ರಮುಖ ಸ್ಥಳಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತು. ಸಂಘದ ಪ್ರಧಾನ ಕಚೇರಿ (ಮಹಲ್), ರೇಶಿಂಬಾಗ್ ಸ್ಮಾರಕ, ಗಣೇಶಪೇಟೆಯಲ್ಲಿರುವ ಬಿಜೆಪಿ ಕಚೇರಿ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಅತ್ಯಾಧುನಿಕ ಉಪಕರಣಗಳ ಸಹಾಯದಿಂದ ಸುಮಾರು ಒಂದು ಗಂಟೆ ಕಾಲ ವ್ಯಾಪಕ ತಪಾಸಣೆ ನಡೆಸಲಾಯಿತು.
ಪತ್ರದಲ್ಲಿ ಉಲ್ಲೇಖಿಸಲಾಗಿದ್ದ ಅಪಾಯಕಾರಿ ‘ಸೀಸಿಯಮ್-137’ (Cesium-137) ಅಥವಾ ಯಾವುದೇ ಇತರ ವಿಕಿರಣಶೀಲ ಕಣಗಳು ತಪಾಸಣೆಯ ಸಮಯದಲ್ಲಿ ಎಲ್ಲಿಯೂ ಕಂಡುಬಂದಿಲ್ಲ.
ಎಟಿಎಸ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಕೇವಲ ಯಾರೋ ಕಿಡಿಗೇಡಿಗಳು ಮಾಡಿದ ಕುಚೇಷ್ಟೆಯೋ ಅಥವಾ ಇದರ ಹಿಂದೆ ಯಾವುದಾದರೂ ದೊಡ್ಡ ಪಿತೂರಿ ಅಡಗಿದೆಯೇ ಎಂಬ ನಿಟ್ಟಿನಲ್ಲಿ ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ನಾಗಪುರದ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ.

























