ದಾವಣಗೆರೆ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ.
ಮುಸ್ಲಿಮರನ್ನು ಓಲೈಸುವ ದೃಷ್ಟಿಯಿಂದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಚುನಾವಣಾ ಬಳಿಕ ಮುಸಲ್ಮಾನರ ವಿರೋಧ ಸರಿಪಡಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ಸಂಬಂಧ ಮುಸ್ಲಿಂ ವಿದ್ಯಾರ್ಥಿನಿಯರೇ ಕೋರ್ಟ್ಗೆ ಹೋಗಿದ್ದರು. ಆದರೆ ಹಿಜಾಬ್ ಕಡ್ಡಾಯ ಎಂದು ಕುರಾನ್ನಲ್ಲಿ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಶಾಲೆಯ ಗೇಟಿನ ವರೆಗೆ ಹಿಜಾಬ್ ಧರಿಸಬಹುದು. ಶಾಲಾ ಆವರಣದಲ್ಲಿ ಎಲ್ಲರಂತೆ ಸಮವಸ್ತ್ರ ಧರಿಸಬೇಕು. ಆದ್ದರಿಂದ ಹಿಜಾಬ್ಗೆ ನೀಡಿದ ಅವಕಾಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಜೂನ್ 1 ರಿಂದ ಶ್ರೀರಾಮ ಸೇನೆಯ ವತಿಯಿಂದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ವಿತರಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಬಾಂಗ್ಲಾ ಮುಸ್ಲಿಂ ವಲಸಿಗರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಅಕ್ರಮ ವಲಸಿಗರಿಗೆ ಇಲ್ಲಿ ವೇಗವಾಗಿ ಗುರುತಿನ ಚೀಟಿಗಳು ದೊರೆಯುತ್ತವೆ. ಇದು ದೇಶದ ಭದ್ರತೆಗೆ ಆಪತ್ತಾಗಿದೆ. ಇದರ ವಿರುದ್ಧ ತಮಿಳುನಾಡು, ಕೇರಳ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಗೋಹತ್ಯೆ ನಿಯಂತ್ರಣ ಕುರಿತಾಗಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿರುವುದಾಗಿ ತಿಳಿಸಿದ ಅವರು, ಗೋಮಾಂಸ ರಫ್ತನಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ಆದಾಯ ಬರುತ್ತಿರುವುದರಿಂದ ದ್ವಂದ್ವ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಗೋಹತ್ಯೆ ನಿರಂತರವಾಗಿ ನಡೆಯುತ್ತಿದೆ. ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ನಡೆಯದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಇದಲ್ಲದೆ, ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆರೋಪಿಸಿದ ಅವರು, ಶ್ರೀರಾಮ ಸೇನೆಯ ವತಿಯಿಂದ ಐದು ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ.
























