ನಿರ್ಮಾಣ ಹಂತದಲ್ಲಿದ್ದ ಸೇತುವೆ ಚಂಡಮಾರುತದ ಹೊಡೆತಕ್ಕೆ ಧರಾಶಾಯಿ
ಲಖನೌ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್ಪುರದಲ್ಲಿ ನಡೆದಿದೆ.
ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ ಈಗ ಜನರ ಜೀವಕ್ಕೆ ಸಂಚಕಾರ ತಂದಿದೆ. ಘಟನೆಯಲ್ಲಿ ಈವರೆಗೆ 6 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ಇದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಬೃಹತ್ ಕಾರ್ಯಾಚರಣೆ ಕೈಗೊಂಡಿವೆ.
ಹಮೀರ್ಪುರದ ಮೋರಾ ಕಂದರ್ ಮತ್ತು ಕುರಾರಾ ಪ್ರದೇಶಗಳನ್ನ ಸಂಪರ್ಕಿಸಲು ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಗುರುವಾರ ತಡರಾತ್ರಿ ಪ್ರದೇಶದಲ್ಲಿ ಬಲವಾದ ಬಿರುಗಾಳಿ ಅಪ್ಪಳಿಸಿದೆ. ಇದರಿಂದ ನಿರ್ಮಾಣ ಹಂತದ ಸೇತುವೆ ಬೃಹತ್ ಸ್ಲ್ಯಾಬ್ ಕುಸಿದು ಬಿದ್ದಿದೆ. ಘಟನೆಯಲ್ಲಿ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಹಮೀರ್ಪುರ ಸೇತುವೆ ದುರಂತದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಸಾಧ್ಯವಿರುವ ಎಲ್ಲ ಸಹಾಯ ಒದಗಿಸಬೇಕು ಎಂದು ಸಿಎಂ ಯೋಗಿ ಸೂಚಿಸಿದ್ದಾರೆ.
























